
ಬೆಂಗಳೂರು: 2023ರ ಮೇ ತಿಂಗಳಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯದ ಹಿತಾಸಕ್ತಿಗಳನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿರುವ ರಾಜ್ಯ ಛಲವಾದಿ ಸಂಗಮ, ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಗಳಿಗೆ ಮೀಸಲಾದ ಸುಮಾರು ₹54,000 ಕೋಟಿ ಅನುದಾನವನ್ನು ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ದಲಿತರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸುತ್ತಿರುವುದು ಸಾಮಾಜಿಕ ನ್ಯಾಯದ ಆಶಯಕ್ಕೆ ವಿರುದ್ಧವಾಗಿದೆ ಎಂದು ಸಂಘಟನೆ ಆರೋಪಿಸಿದೆ. ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿವೇತನ ನೀಡದಿರುವುದು, ಪ್ರಬುದ್ಧ ಯೋಜನೆಯ ಅನುಷ್ಠಾನದಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಪರಿಹರಿಸದಿರುವುದು ಹಾಗೂ ವಿದ್ಯಾರ್ಥಿ ನಿಲಯಗಳ ಆಧುನೀಕರಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯ ಆದ್ಯತೆ ನೀಡದಿರುವುದರಿಂದ ದಲಿತ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಹೇಳಿದೆ.
ವಿವಿಧ ಇಲಾಖೆಗಳ ವಿಶೇಷ ಘಟಕ ಯೋಜನೆಗಳಿಗೆ ಸಮರ್ಪಕ ಅನುದಾನ ಒದಗಿಸದೆ ದಲಿತರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕೆ ಹಿನ್ನಡೆಯಾಗುತ್ತಿದೆ ಎಂದು ರಾಜ್ಯ ಛಲವಾದಿ ಸಂಗಮದ ಸಂಚಾಲಕರು ಆರೋಪಿಸಿದ್ದಾರೆ.
ಮೀಸಲಾತಿ ವಿಚಾರದಲ್ಲೂ ಅಸಮಾಧಾನ
ಹಿಂದಿನ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿತ್ತು. ಈ ಪರಿಷ್ಕೃತ ಮೀಸಲಾತಿ ವ್ಯವಸ್ಥೆಯನ್ನು ನ್ಯಾಯಾಲಯದಲ್ಲಿ ಸಮರ್ಥವಾಗಿ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಸಂಘಟನೆ ಟೀಕಿಸಿದೆ.
ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಪರವಾಗಿ ಮಾತನಾಡುವ ಕಾಂಗ್ರೆಸ್ ಸರ್ಕಾರದ ನೀತಿಗಳು ದಲಿತ ಸಮುದಾಯದ ವಿಚಾರದಲ್ಲಿ ಭಿನ್ನವಾಗಿವೆ. ಇದು ಸರ್ಕಾರದ ದ್ವಂದ್ವ ನೀತಿಯನ್ನು ತೋರಿಸುತ್ತದೆ ಎಂದು ಸಂಘಟನೆ ಆರೋಪಿಸಿದೆ.
ಒಳಮೀಸಲಾತಿ ವಿಚಾರದಲ್ಲಿಯೂ ಬಲಗೈ ಸಮುದಾಯದ ಹಿತಾಸಕ್ತಿಗಳಿಗೆ ಧಕ್ಕೆಯಾಗುವ ರೀತಿಯಲ್ಲಿ ಅಂಕಿಅಂಶಗಳನ್ನು ಪರಿಗಣಿಸಲಾಗಿದೆ ಎಂಬ ಆಕ್ಷೇಪವನ್ನು ಸಂಘಟನೆ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗದ ವರದಿಯಲ್ಲಿನ ಅಂಕಿಅಂಶಗಳ ಆಧಾರ ಮತ್ತು ಅದರ ಪರಿಣಾಮಗಳ ಕುರಿತು ಮರುಪರಿಶೀಲನೆ ಅಗತ್ಯವಿದೆ ಎಂದು ಆಗ್ರಹಿಸಿದೆ.
ದಲಿತ ಮಹಿಳೆಯರ ಸುರಕ್ಷತೆಗೆ ಒತ್ತು
ರಾಜ್ಯದಲ್ಲಿ ದಲಿತ ಮಹಿಳೆಯರು ಸೇರಿದಂತೆ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಸಂಘಟನೆ ಹೇಳಿದೆ. ರಾಯಚೂರು ಜಿಲ್ಲೆಯ ಹೊಕ್ರಾಣಿ ಗ್ರಾಮದ ಅಶ್ವಿನಿ ಅವರ ಸಾವಿನ ಪ್ರಕರಣ ಹಾಗೂ ಲಿಂಗಸುಗೂರು ತಾಲ್ಲೂಕಿನ ಕರಡಕಲ್ ಗ್ರಾಮದ ರಾಣಿಮಾ ಅವರ ಅನುಮಾನಾಸ್ಪದ ಸಾವಿನ ಪ್ರಕರಣಗಳನ್ನು ಉಲ್ಲೇಖಿಸಿರುವ ಸಂಘಟನೆ, ಮಹಿಳೆಯರ ಸುರಕ್ಷತೆಗಾಗಿ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.
ರಾಜ್ಯ ಛಲವಾದಿ ಸಂಗಮಕ್ಕೆ ಬಲಿಷ್ಠ ಸಂಘಟನೆ ರೂಪಿಸುವ ಸಂಕಲ್ಪ
ರಾಜ್ಯ ಛಲವಾದಿ ಸಂಗಮವು ಬಲಗೈ ಸಮುದಾಯವನ್ನು ಪಕ್ಷಾತೀತವಾಗಿ ಸಂಘಟಿಸಿ, ಸಮುದಾಯದ ಹಕ್ಕುಗಳು ಮತ್ತು ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳು ಹಾಗೂ ಸಂವಿಧಾನದ ಮೌಲ್ಯಗಳನ್ನು ಯುವಜನರು ಮತ್ತು ವಿದ್ಯಾರ್ಥಿಗಳಿಗೆ ತಲುಪಿಸುವುದರ ಜೊತೆಗೆ, ಯಾವುದೇ ಸರ್ಕಾರ ಸಮುದಾಯದ ಹಿತಾಸಕ್ತಿಗೆ ವಿರುದ್ಧವಾದ ನಿರ್ಧಾರ ಕೈಗೊಂಡರೆ ಪ್ರಜಾಸತ್ತಾತ್ಮಕವಾಗಿ ಅದನ್ನು ವಿರೋಧಿಸಲಾಗುವುದು ಎಂದು ಸಂಘಟನೆ ತಿಳಿಸಿದೆ.
ಎಲ್ಲಾ ಸರ್ಕಾರಗಳೊಂದಿಗೆ ಸಾಮರಸ್ಯದಿಂದ ಸಂವಾದ ನಡೆಸುತ್ತಾ ಸಮುದಾಯದ ಅಭಿವೃದ್ಧಿಗೆ ಅಗತ್ಯವಾದ ಕ್ರಮಗಳಿಗಾಗಿ ಹೋರಾಡುವುದು ಸಂಘಟನೆಯ ಉದ್ದೇಶವಾಗಿದೆ. ತಾಲ್ಲೂಕು ಮತ್ತು ಜಿಲ್ಲಾ ಸಮಿತಿಗಳ ಮೂಲಕ ರಾಜ್ಯ ಸಮಿತಿಯನ್ನು ಬಲಪಡಿಸುವ ಕಾರ್ಯ ನಡೆಯಲಿದ್ದು, ಈಗಾಗಲೇ ವಿವಿಧ ಜಿಲ್ಲೆಗಳಿಗೆ ಸಂಚಾಲಕರನ್ನು ನೇಮಕ ಮಾಡಲಾಗಿದೆ.
ಕೇಂದ್ರ ಸಮಿತಿಯು ರಾಜ್ಯದ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ಛಲವಾದಿ ಸಂಗಮದ ಉದ್ದೇಶ, ಸಂಘಟನೆಯ ರೂಪುರೇಷೆ ಹಾಗೂ ಸದಸ್ಯತ್ವ ನೋಂದಣಿ ಕುರಿತು ಸಮುದಾಯದವರಿಗೆ ಮಾಹಿತಿ ನೀಡಲಿದೆ ಎಂದು ತಿಳಿಸಲಾಗಿದೆ.
ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಛಲವಾದಿ ಸಂಗಮವು ಬಲಗೈ ಸಮುದಾಯದ ಜ್ವಲಂತ ಸಮಸ್ಯೆಗಳ ಕುರಿತು ರಾಜ್ಯಾದ್ಯಂತ ಜಾಗೃತಿ, ಹೋರಾಟ, ಚರ್ಚೆ, ಸಂವಾದ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿಚಾರ ಸಂಕಿರಣಗಳನ್ನು ಆಯೋಜಿಸಲು ಮುಂದಾಗಿದೆ. ಮೀಸಲಾತಿ ಸಮರ್ಥನೆಗೆ ಪೂರಕ ಚಟುವಟಿಕೆಗಳು, ಸಂವಿಧಾನ ರಕ್ಷಣೆಯ ಜಾಗೃತಿ ಹಾಗೂ ‘ಮನೆ ಮನೆಗೂ ಸಂವಿಧಾನ’ದಂತಹ ವಿನೂತನ ಕಾರ್ಯಕ್ರಮಗಳ ಮೂಲಕ ಬಲಿಷ್ಠ ಮತ್ತು ಪ್ರಬಲ ಸಂಘಟನೆಯನ್ನು ಕಟ್ಟಲು ನಿರಂತರವಾಗಿ ಶ್ರಮಿಸಲಾಗುವುದು ಎಂದು ರಾಜ್ಯ ಛಲವಾದಿ ಸಂಗಮ-ಸಂಚಾಲಕರು ತಿಳಿಸಿದ್ದಾರೆ.
City Today News 9341997936






You must be logged in to post a comment.