ಶಿಕ್ಷಣ ಕ್ಷೇತ್ರದ ಬೆಳವಣಿಗೆಗಳ ಬಗ್ಗೆ ಬಿಜೆಪಿ ಶಿಕ್ಷಣ ಪ್ರಕೋಷ್ಠದ ತೀವ್ರ ಅಸಮಾಧಾನ

ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳ ಕುರಿತು ಭಾರತೀಯ ಜನತಾ ಪಕ್ಷದ ಶಿಕ್ಷಣ ಪ್ರಕೋಷ್ಠ ತೀವ್ರ ಆತಂಕ ಮತ್ತು ಅಸಮಾಧಾನ ವ್ಯಕ್ತಪಡಿಸಿದೆ.
ತ್ರಿಭಾಷಾ ಸೂತ್ರದ ಅಡಿಯಲ್ಲಿ ವಿದ್ಯಾರ್ಥಿಗಳು ಹಿಂದಿ ಭಾಷೆ ಕಲಿಯಬೇಕೆಂದು ಹಲವು ವರ್ಷಗಳಿಂದ ಹೇಳುತ್ತಿದ್ದ ರಾಜ್ಯ ಸರ್ಕಾರ, ಈಗ ಯಾವುದೇ ಪೂರ್ವ ಚರ್ಚೆ ನಡೆಸದೆ ಮತ್ತು ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರ ಅಭಿಪ್ರಾಯಗಳನ್ನು ಪರಿಗಣಿಸದೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಹಿಂದಿ ವಿಷಯವನ್ನು ಕೈಬಿಡುವ ಸೂಚನೆ ನೀಡಿರುವುದು ಶಿಕ್ಷಣ ವಲಯದಲ್ಲಿ ಗೊಂದಲ ಉಂಟುಮಾಡಿದೆ ಎಂದು ಪ್ರಕೋಷ್ಠ ಅಭಿಪ್ರಾಯಪಟ್ಟಿದೆ.
ಈ ರೀತಿಯ ನಿರ್ಧಾರಗಳು ವಿದ್ಯಾರ್ಥಿಗಳ ಭವಿಷ್ಯ, ಅವರ ಸ್ಪರ್ಧಾತ್ಮಕ ಸಾಮರ್ಥ್ಯ ಹಾಗೂ ಬಹುಭಾಷಾ ಅಧ್ಯಯನದ ಅಗತ್ಯತೆಗಳನ್ನು ಕಡೆಗಣಿಸುವಂತಿವೆ. ರಾಜಕೀಯ ಲಾಭಕ್ಕಾಗಿ ಶಿಕ್ಷಣ ಕ್ಷೇತ್ರವನ್ನು ಪ್ರಯೋಗಾಲಯವನ್ನಾಗಿ ಮಾಡಬಾರದು ಎಂದು ಪ್ರಕೋಷ್ಠ ಎಚ್ಚರಿಸಿದೆ.
ಈಗಾಗಲೇ ನಡೆದಿರುವ ಪರೀಕ್ಷೆಗೆ ಸಂಬಂಧಿಸಿ ವಿದ್ಯಾರ್ಥಿಗಳಿಗೆ ಗ್ರೇಡ್ ನೀಡಲಾಗುವುದು ಎಂಬ ಸರ್ಕಾರದ ಹೇಳಿಕೆ, ವಿದ್ಯಾರ್ಥಿಗಳ ಪರಿಶ್ರಮದ ಮೌಲ್ಯವನ್ನು ಕುಗ್ಗಿಸುವಂತಿದೆ. ಜೊತೆಗೆ ಹಿಂದಿ ಬೋಧಕರಲ್ಲಿ ಆತಂಕ ಉಂಟುಮಾಡಿದೆ ಎಂದು ಪ್ರಕೋಷ್ಠ ಟೀಕಿಸಿದೆ. ವಿದ್ಯಾರ್ಥಿಗಳಿಗೆ ಯಾವುದೇ ಅನ್ಯಾಯವಾಗದಂತೆ ಸಮರ್ಪಕ ಗ್ರೇಸ್ ಅಂಕಗಳನ್ನು ನೀಡುವಂತೆ ಸರ್ಕಾರವನ್ನು ಆಗ್ರಹಿಸಿದೆ.
ಇದರೊಂದಿಗೆ ಇತ್ತೀಚೆಗೆ ನಡೆದ ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಕಂಡುಬಂದಿರುವ ಅವ್ಯವಸ್ಥೆಯನ್ನೂ ಪ್ರಕೋಷ್ಠ ತೀವ್ರವಾಗಿ ಖಂಡಿಸಿದೆ. ಪ್ರಶ್ನೆಪತ್ರಿಕೆಯಲ್ಲಿ ಬಾರ್ಕೋಡ್ ಮುದ್ರಣದ ತಾಂತ್ರಿಕ ದೋಷದಿಂದ ಕೆಲ ಪ್ರಶ್ನೆಗಳು ಸ್ಪಷ್ಟವಾಗಿ ಕಾಣದ ಸಮಸ್ಯೆ ಉಂಟಾಗಿದೆ ಎನ್ನಲಾಗಿದೆ. ಇಂತಹ ಗಂಭೀರ ದೋಷಗಳು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯವನ್ನು ತೋರಿಸುತ್ತವೆ ಎಂದು ಅಭಿಪ್ರಾಯಪಟ್ಟಿದೆ.
ಈ ಹಿನ್ನೆಲೆ, ಸಂಬಂಧಿತ ಪ್ರಶ್ನೆಗಳಿಗೆ ಗ್ರೇಸ್ ಅಂಕಗಳನ್ನು ನೀಡುವಂತೆ ಹಾಗೂ ಘಟನೆ ಕುರಿತು ಸಮಗ್ರ ತನಿಖೆ ನಡೆಸಿ ಹೊಣೆಗಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದೆ. ಮುಂದಿನ ದಿನಗಳಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ಇನ್ನಷ್ಟು ಪಾರದರ್ಶಕ ಮತ್ತು ಜವಾಬ್ದಾರಿಯುತವಾಗಿ ನಿರ್ವಹಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದೆ.
ಇನ್ನೂ, ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು, ಸಮವಸ್ತ್ರಗಳು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಸಮಯಕ್ಕೆ ಸರಿಯಾಗಿ ಒದಗಿಸುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ವರದಿಗಳು ಬರುತ್ತಿರುವುದನ್ನೂ ಪ್ರಕೋಷ್ಠ ಗಮನಕ್ಕೆ ತಂದಿದೆ. ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.
ರಾಜ್ಯದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳಿಗೆ ಅನ್ಯಾಯವಾದರೆ ಬಿಜೆಪಿ ಶಿಕ್ಷಣ ಪ್ರಕೋಷ್ಠ ಸದಾ ಅವರ ಜೊತೆ ನಿಂತು ಧ್ವನಿಯಾಗಲಿದೆ ಎಂದು ರಾಜ್ಯ ಸಂಚಾಲಕ ಡಾ. ಪಿ.ಬಿ. ಶಶಿಧರ್ ಹಾಗೂ ರಾಜ್ಯ ಸಮಿತಿ ಸದಸ್ಯ ಕೆ. ಹರೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
City Today News 9341997936







You must be logged in to post a comment.