ಸಾಮಾಜಿಕ ನ್ಯಾಯ ಸಲ್ಲಿಕೆಯಲ್ಲಿ ಪಕ್ಷಪಾತ
ಭಾರತದಲ್ಲಿ ಸಾಮಾಜಿಕ ನ್ಯಾಯದ ಸಲ್ಲಿಕೆಯಲ್ಲ್ಲಿ ಆಗುತ್ತಿರುವ ಪಕ್ಷಪಾತಕ್ಕೆ ಭಾರತ ಕ್ಯಾಥಲಿಕ್ ಬಿಷಪ್ ಸಮ್ಮೇಳನ (ಸಿಬಿಸಿಐ) ಆತಂಕವನ್ನು ವ್ಯಕ್ತಪಡಿಸುತ್ತಿದೆ. ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10 ಮೀಸಲಾತಿ ಕಲ್ಪಿಸುವ ಮಸೂದೆಗೆ ಸಂಸತ್ತಿನ ಉಭಯ ಸದನಗಳಲ್ಲಿ ಅನುಮೋದನೆ ದೊರೆತಿದೆ.
ಅವರಿಗಾಗಿ ವಿವಿಧ ಯೋಜನೆಗಳು, ವಿದ್ಯಾರ್ಥಿ ವೇತನಗಳು ಇದ್ದರೂ ಸಹ ಸರ್ಕಾರ ಈ ಮಸೂದೆಯ ಕುರಿತು ವಿಶೇಷ ಆಸ್ಥೆ ವಹಿಸಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳು ದೇಶದಲ್ಲಿನ ಜಾತಿ ವ್ಯವಸ್ಥೆಯಿಂದ ಪ್ರಭಾವಿತವಾಗಿಲ್ಲ ಎಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿದೆ. ನಮಗೆ ತಿಳಿದಂತೆ ಯಾವುದೇ ವೈಜ್ಞಾನಿಕ ಅಧ್ಯಯನ ಮಾಡದೆ ಈ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲಾಗಿದೆ.
ಪರಿಶಿಷ್ಟ ಜಾತಿ ಮೂಲದ ಕ್ರೈಸ್ತ ಮತ್ತು ಮುಸ್ಲಿಮರ ಕುರಿತು ಸರ್ಕಾರ ಅದೇ ರೀತಿಯ ಕಾಳಜಿಯನ್ನು ತೋರದಿರುವುದು ನಮ್ಮ ಆತಂಕಕ್ಕೆ ಕಾರಣವಾಗಿದ್ದು, ಧರ್ಮದ ಹೆಸರಿನಲ್ಲಿ ಅವರ ಬಗ್ಗೆ ಪಕ್ಷಪಾತ ತೋರುತ್ತಿದೆ ಎಂದು ಅನಿಸುತ್ತದೆ.
ಪರಿಶಿಷ್ಟ ಜಾತಿ ಮೂಲದ ಕ್ರೈಸ್ತ ಮತ್ತು ಮುಸ್ಲಿಮರು 1950 ರಿಂದಲೂ ತಮ್ಮನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವಂತದ ಒತ್ತಾಯಿಸುತ್ತಿದ್ದಾರೆ. ಅವರು ಅಸ್ಪೃಶ್ಯ ಸಮುದಾಯಗಳಲ್ಲಿ ಜನಿಸಿದವರಾಗಿದ್ದು ಈಗಲೂ ಅದರ ನೋವನ್ನು ಅನುಭವಿಸುತ್ತಿದ್ದಾರೆ. ಅವರು ತಮ್ಮ ಸಹೋದರರಾದ ಹಿಂದೂ ದಲಿತರಂತೆ ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಬಹಳ ಹಿಂದುಳಿದಿದ್ದಾರೆ.
ಪರಿಶಿಷ್ಟ ಜಾತಿ ಮೂಲದ ಕೈಸ್ತ ಮತ್ತು ಮುಸ್ಲಿಮರು ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿರುವುದನ್ನು ಹಿಂದುಳಿದ ವರ್ಗಗಳ ಆಯೋಗಗಳು ಗುರ್ತಿಸಿದ್ದು ಅವರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡುವಂತೆ ಶಿಫಾರಸು ಮಾಡಿವೆ. ( ಕಾಕಾ ಕಾಳೇಕರ್ ಹಿಂದುಳಿದ ವರ್ಗಗಳ ಆಯೋಗ, ಭಾರತ ಸರ್ಕಾರ, 1955, ನೆಟ್ಟೂರು ಆಯೋಗದ ವರದಿ, ಕೇರಳ ಸರ್ಕಾರ, 1965, ಆಂಧ್ರಪ್ರದೇಶ ಸರ್ಕಾರದ ಹಿಂದುಳಿದ ವರ್ಗಗಳ ಆಯೋಗ, 1970, ಇಲಯಪೆರುಮಾಳ್ ಆಯೋಗ, 1969 ॒ಮುಂತಾದವು).
ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ (NCRLM).2007 ರಲ್ಲಿ ಹೇಳಿರುವಂತೆ, ಪರಿಶಿಷ್ಟ ಜಾತಿ ಮೂಲದ ಕ್ರೈಸ್ತ ಮತ್ತು ಮುಸ್ಲಿಮರನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರ್ಪಡೆ ಮಾಡದಿರುವುದು ಧರ್ಮದ ಆಧಾರದ ಮೇಲೆ ಪಕ್ಷಪಾತ ಮಾಡಿದಂತೆ ಆಗುತ್ತದೆ ಮತ್ತು ಅದು ಸಂವಿಧಾನಕ್ಕೆ ವಿರೋಧವಾಗಿರುತ್ತದೆ.
ಭಾರತ ಸರ್ಕಾರದ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗಕ್ಕಾಗಿ ಪ್ರೊ. ಸತೀಶ್ ದೇಶಪಾಂಡೆಯವರು ಸಿದ್ದಪಡಿಸಿದ ಮುಸ್ಲಿಂ ಮತ್ತು ಕ್ರೈಸ್ತ ಸಮುದಾಯಗಳಲ್ಲಿ ದಲಿತರು, ಪ್ರಸಕ್ತ ಸಾಮಾಜಿಕ ಮತ್ತು ವೈಜ್ಞಾನಿಕ ಜ್ಞಾನದ ಸ್ಥಿತಿಗತಿಯ ವರದಿ ಸ್ಪಷ್ಟವಾಗಿ ಹೇಳಿರುವಂತೆ, ದಲಿತ ಮುಸ್ಲಿಮರು ಮತ್ತು ದಲಿತ ಕ್ರೈಸ್ತರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡುವುದನ್ನು ನಿರಾಕರಿಸುವುದಕ್ಕೆ ಯಾವುದೇ ಸೂಕ್ತ ಸಾಕ್ಷ್ಯಾಧಾರವಿಲ್ಲ.
ಆಯೋಗಗಳು ಮತ್ತು ವೈಜ್ಞಾನಿಕ ಅಧ್ಯಯನಗಳ ಶಿಫಾರಸುಗಳಿದ್ದರೂ ಪರಿಶಿಷ್ಟ ಜಾತಿ ಮೂಲದ ಕ್ರೈಸ್ತರು ಮತ್ತು ಮುಸ್ಲಿಮರಿಗೆ ನ್ಯಾಯವನ್ನು ಸರ್ಕಾರ ನಿರಾಕರಿಸುವುದು ನಿಜವಾದ ಸಾಮಾಜಿಕ ಅನ್ಯಾಯವಾಗಿದೆ.
ಹಾಗಾಗಿ ನಾವು ಮಾನ್ಯ ಭಾರತ ಪ್ರಧಾನ ಮಂತ್ರಿಗಳನ್ನು ವಿನಂತಿಸಿಕೊಳ್ಳುವುದೇನೆಂದರೆ, ಪರಿಶಿಷ್ಟ ಜಾತಿ ಮೂಲದ ಕ್ರೈಸ್ತರು ಮತ್ತು ಮುಸ್ಲಿಮರನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರ್ಪಡೆಗೊಳಿಸುವ ಮಸೂದೆಯನ್ನು ಅನುಮೋದಿಸಬೇಕು ಮತ್ತು ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿಯನ್ನು ಹೆಚ್ಚಿಸಬೇಕು.
ಫಾ. ದೇವಸಗಾಯರಾಜ್
ರಾಷ್ಟ್ರೀಯ ಕಾರ್ಯದರ್ಶಿ
ಭಾರತ ಕ್ಯಾಥಲಿಕ್ ಬಿಷಪ್ ಸಮ್ಮೇಳನ
City Today News
(citytoday.media)
9341997936
