ಸಾಮಾಜಿಕ ನ್ಯಾಯದ ನೆಲೆಯಲ್ಲಿ ಡಾ. ಡಿ. ತಿಮ್ಮಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಎಡಗೈ ಸಮುದಾಯದ ಒತ್ತಾಯ

ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಮಾದಿಗೆ (ಎಡಗೈ) ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ ಅವರಿಗೆ ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಬೇಕು ಎಂದು ಎಡಗೈ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ಆಫ್ ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಮೈಸೂರು–ಚಾಮರಾಜನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಅತ್ಯಧಿಕ ಮತಗಳ ಅಂತರದಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಡಾ. ಡಿ. ತಿಮ್ಮಯ್ಯ ಅವರು ಕಳೆದ ಮೂರು ದಶಕಗಳಿಂದ ಮೈಸೂರು ವಿಭಾಗದಲ್ಲಿ ಮಾದಿಗೆ (ಎಡಗೈ) ಸಮುದಾಯವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಹೇಳಿದರು.

ಅಲ್ಲದೆ, ವಿಧಾನಸಭೆ, ಲೋಕಸಭೆ ಸೇರಿದಂತೆ ವಿವಿಧ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ನಿರಂತರವಾಗಿ ಶ್ರಮಿಸಿದ್ದಾರೆ ಎಂದು ವಿವರಿಸಿದರು.
ಪರಿಶಿಷ್ಟ ಜಾತಿಗಳ ಪ್ರವರ್ಗ ‘ಬಿ’ಗೆ ಈಗಾಗಲೇ ಉಪ ಮುಖ್ಯಮಂತ್ರಿ ಹುದ್ದೆ ಸೇರಿದಂತೆ ಎರಡು ಸಚಿವ ಸ್ಥಾನಗಳನ್ನು ನೀಡಲಾಗಿದೆ. ಅದೇ ಮಾದರಿಯಲ್ಲಿ ಪ್ರವರ್ಗ ‘ಎ’ಗೂ ಉಪ ಮುಖ್ಯಮಂತ್ರಿ ಸ್ಥಾನ ಸೇರಿದಂತೆ ಎರಡು ಸಚಿವ ಸ್ಥಾನಗಳನ್ನು ನೀಡುವ ಮೂಲಕ ಸಮಾನ ಅವಕಾಶ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು. ಜೊತೆಗೆ, ಸಮುದಾಯದ ಹಿರಿಯ ನಾಯಕರಾದ ಕೆ. ಎಚ್. ಮುನಿಯಪ್ಪ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಅವರನ್ನು ಮನವಿ ಮಾಡಿದರು.

ಮೈಸೂರು ವಿಭಾಗದಲ್ಲಿ ಕಳೆದ 25 ವರ್ಷಗಳಿಂದ ಪರಿಶಿಷ್ಟ ಜಾತಿ (ಎಡಗೈ) ಸಮುದಾಯಕ್ಕೆ ಸಚಿವ ಸ್ಥಾನ ದೊರೆತಿಲ್ಲ. ಅಲ್ಲದೆ, ಈ ವಿಭಾಗದಲ್ಲಿ ಏಳು ಪರಿಶಿಷ್ಟ ಜಾತಿ ಮೀಸಲು ವಿಧಾನಸಭಾ ಕ್ಷೇತ್ರಗಳಿದ್ದರೂ ಸಮುದಾಯದ ನಾಯಕರಿಗೆ ಸಮರ್ಪಕ ರಾಜಕೀಯ ಪ್ರಾತಿನಿಧ್ಯ ದೊರೆತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಸಾಮಾಜಿಕ ನ್ಯಾಯ ಮತ್ತು ಸಮುದಾಯದ ರಾಜಕೀಯ ಪ್ರಾತಿನಿಧ್ಯವನ್ನು ಪರಿಗಣಿಸಿ, ಡಾ. ಡಿ. ತಿಮ್ಮಯ್ಯ ಅವರಿಗೆ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕತ್ವವನ್ನು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಕೆ.ಆರ್. ರಾಚಯ್ಯ, ಪ್ರಧಾನ ಕಾರ್ಯದರ್ಶಿ ಎಡತೊರೆ ಎಂ. ನಿಂಗರಾಜ್, ಉಪಾಧ್ಯಕ್ಷ ಎಂ. ಶಿವಮೂರ್ತಿ, ಸಂಘಟನಾ ಕಾರ್ಯದರ್ಶಿ ಡಿ. ಕುಮಾರ್ ಹಾಗೂ ಸಹಾಯಕ ಕಾರ್ಯದರ್ಶಿ ವಿಜಯಕುಮಾರ್ ಉಪಸ್ಥಿತರಿದ್ದರು.

City Today News 9341997936

Leave a comment

This site uses Akismet to reduce spam. Learn how your comment data is processed.