“371(ಜೆ) ಮೀಸಲಾತಿಯಿಂದ ದಕ್ಷಿಣ ಕರ್ನಾಟಕಕ್ಕೆ ಅನ್ಯಾಯ”, ಒಕ್ಕಲಿಗ ಸಮಿತಿ ಆಕ್ರೋಶ

ಬೆಂಗಳೂರು, ಮೇ 16: ಕಲಂ 371(ಜೆ) ಅಡಿಯಲ್ಲಿ ಹೈದರಾಬಾದ್ ಕರ್ನಾಟಕ ಭಾಗಕ್ಕೆ ನೀಡಲಾಗಿರುವ ಪ್ರಾದೇಶಿಕ ಸ್ಥಳೀಯ ಮೀಸಲಾತಿಯ ಪರಿಣಾಮವಾಗಿ ಹಳೆಯ ಮೈಸೂರು, ಕಿತ್ತೂರು ಕರ್ನಾಟಕ ಹಾಗೂ ಕರಾವಳಿ ಭಾಗದ ನಿರುದ್ಯೋಗಿ ಯುವಕರು ಮತ್ತು ಸರ್ಕಾರಿ ನೌಕರರಿಗೆ ಅನ್ಯಾಯವಾಗುತ್ತಿದೆ ಎಂದು ಒಕ್ಕಲಿಗ ಮೀಸಲಾತಿ ಹೋರಾಟ ಸಮಿತಿ ಆರೋಪಿಸಿದೆ.

ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಒಕ್ಕೂಟದ ಪದಾಧಿಕಾರಿಗಳು, 98ನೇ ಸಂವಿಧಾನ ತಿದ್ದುಪಡಿ ಮೂಲಕ ಜಾರಿಗೆ ಬಂದಿರುವ 371(ಜೆ) ವಿಶೇಷ ವಿಧಾನದ ಅಡಿಯಲ್ಲಿ ಸರ್ಕಾರಿ ಉದ್ಯೋಗ ಹಾಗೂ ಬಡ್ತಿಗಳಲ್ಲಿ ಹೈದರಾಬಾದ್ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ವಿಶೇಷ ಮೀಸಲಾತಿ ಕಲ್ಪಿಸಲಾಗಿದೆ. ಇದರಿಂದ ದಕ್ಷಿಣ ಕರ್ನಾಟಕ ಭಾಗದ ಒಕ್ಕಲಿಗ ಸೇರಿದಂತೆ ಇತರ ಸಮುದಾಯಗಳ ಅಭ್ಯರ್ಥಿಗಳಿಗೆ ಉದ್ಯೋಗ ಮತ್ತು ಬಡ್ತಿ ಅವಕಾಶಗಳು ಸೀಮಿತವಾಗುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದ ಎಲ್ಲ ಭಾಗಗಳ ಜನರಿಗೆ ಸಮಾನ ಅವಕಾಶ ದೊರಕುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಯಾವುದೇ ಪ್ರದೇಶ ಅಥವಾ ಸಮುದಾಯಕ್ಕೆ ಅನ್ಯಾಯವಾಗದ ರೀತಿಯಲ್ಲಿ ಸಂವಿಧಾನಾತ್ಮಕ ಹಾಗೂ ನ್ಯಾಯಸಮ್ಮತ ಪರಿಹಾರ ಕಂಡುಹಿಡಿಯಬೇಕು ಎಂದು ಅವರು ಒತ್ತಾಯಿಸಿದರು.

ಹಳೆಯ ಮೈಸೂರು, ಕಿತ್ತೂರು ಕರ್ನಾಟಕ ಹಾಗೂ ಕರಾವಳಿ ಭಾಗದ ಸಾವಿರಾರು ಅರ್ಹ ಅಭ್ಯರ್ಥಿಗಳು ಉದ್ಯೋಗಾವಕಾಶಗಳಿಂದ ವಂಚಿತರಾಗುತ್ತಿರುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಪ್ರಾದೇಶಿಕ ಅಸಮಾನತೆ ನಿವಾರಣೆ ಮಾಡುವ ಉದ್ದೇಶದಿಂದ ಜಾರಿಯಾದ ವ್ಯವಸ್ಥೆ ಮತ್ತೊಂದು ಭಾಗದ ಜನರಿಗೆ ಅನ್ಯಾಯವಾಗುವಂತಾಗಬಾರದು ಎಂದು ಸಮಿತಿಯ ಪದಾಧಿಕಾರಿಗಳು ಅಭಿಪ್ರಾಯಪಟ್ಟರು.

ರಾಜ್ಯ ಸರ್ಕಾರ ಈ ವಿಚಾರವನ್ನು ಕಾನೂನು ತಜ್ಞರು, ವಿವಿಧ ಸಮುದಾಯಗಳ ಪ್ರತಿನಿಧಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಸಮತೋಲನದ ನಿರ್ಧಾರ ಕೈಗೊಳ್ಳಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಲಾಯಿತು.

City Today News 9341997936