“ವೇತನ ಕೇಳಿದ ಚಾಲಕನ ಮೇಲೆ ಕ್ರೂರ ಹಲ್ಲೆ”, ₹10 ಲಕ್ಷ ಪರಿಹಾರಕ್ಕೆ ಯೂನಿಯನ್ ಒತ್ತಾಯ

ಬೆಂಗಳೂರು, ಏಪ್ರಿಲ್ 2: ವೇತನ ಕೇಳಿದ ಹಿನ್ನೆಲೆಯಲ್ಲಿ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಪೀಡಿತ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಬೇಕು ಎಂದು ಇಂಡಿಯನ್ ವೆಹಿಕಲ್ಸ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಒತ್ತಾಯಿಸಿದೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ, ಬಸವೇಶ್ವರನಗರದ ಸಿದ್ದಗಂಗಾ ಟ್ರಾವೆಲ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಚಾಲಕ ರಾಮೇಗೌಡ ಅವರ ಮೇಲೆ ಮಾರ್ಚ್ 28ರಂದು ಕಚೇರಿಯಲ್ಲೇ ಮಾಲೀಕ ಮಹೇಶ್ ಹಲ್ಲೆ ನಡೆಸಿದರೆಂದು ಆರೋಪಿಸಿದರು. ವೇತನ ನೀಡುವಂತೆ ಕೇಳಿದ ಕಾರಣಕ್ಕೆ ತಲೆಗೆ ಹಲ್ಲೆ ನಡೆಸಲಾಗಿದ್ದು, ಇದರಿಂದ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದರು.

ಈ ಸಂಬಂಧ ರಾಮೇಗೌಡ ಅವರ ಪತ್ನಿ ಬಸವೇಶ್ವರನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ. ಆದರೆ ಪ್ರಕರಣ ದಾಖಲಾಗಿದ್ದರೂ ಇದುವರೆಗೆ ಪೊಲೀಸರು ಸಮರ್ಪಕ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಂಸ್ಥೆಯಲ್ಲಿ 150ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರೂ ಚಾಲಕರು, ನಿರ್ವಾಹಕರು ಹಾಗೂ ಇತರೆ ಕಾರ್ಮಿಕರಿಗೆ ಇಎಸ್ಐ, ಪಿಎಫ್ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ನೀಡದೇ ವಂಚನೆ ನಡೆಯುತ್ತಿದೆ ಎಂದು ಆರೋಪಿಸಿದರು.

ಹಲ್ಲೆಗೊಳಗಾದ ಚಾಲಕನಿಗೆ ₹10 ಲಕ್ಷ ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ ಸಂಘದಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

City Today News 9341997936