
ಬೆಂಗಳೂರು, ಜೂನ್ 5: ಅತಿ ಹಿಂದುಳಿದ ವರ್ಗಗಳ ರಾಜಕೀಯ ಪ್ರಾತಿನಿಧ್ಯವನ್ನು ಹೆಚ್ಚಿಸುವ ಉದ್ದೇಶದಿಂದ ವಿಕಾಸಶೀಲ ಇನ್ಸಾನ್ ಪಾರ್ಟಿ (VIP) ಕರ್ನಾಟಕ ರಾಜಕೀಯಕ್ಕೆ ಅಧಿಕೃತವಾಗಿ ಪ್ರವೇಶಿಸಿದೆ.
ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್ ಕುಮಾರ್ ಬಿ.ಕೆ. ಮಾತನಾಡಿ, ಕೋಲಿ, ಗಂಗಾಮತ, ಬೆಸ್ತ ಸೇರಿದಂತೆ ಹಲವು ಹಿಂದುಳಿದ ಸಮುದಾಯಗಳ ಜನಸಂಖ್ಯೆ ಲಕ್ಷಾಂತರದಲ್ಲಿದ್ದರೂ, ವಿಧಾನಸಭೆಯಲ್ಲಿ ಸಮರ್ಪಕ ಪ್ರತಿನಿಧಿತ್ವ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರಮುಖ ರಾಜಕೀಯ ಪಕ್ಷಗಳು ಹಿಂದುಳಿದ ವರ್ಗಗಳನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಂಡಿವೆ ಎಂದು ಆರೋಪಿಸಿದರು.
ಮಹರ್ಷಿ ವಾಲ್ಮೀಕಿ, ಬಸವಣ್ಣ, ಬುದ್ಧ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವಗಳ ಆಧಾರದಲ್ಲಿ ಪಕ್ಷವನ್ನು ಕಟ್ಟಲಾಗುತ್ತಿದೆ ಎಂದು ತಿಳಿಸಿದ ಅವರು, ಅತಿ ಹಿಂದುಳಿದ ಹಾಗೂ ಅಲೆಮಾರಿ ಸಮುದಾಯಗಳನ್ನು ಒಗ್ಗೂಡಿಸಿ ರಾಜಕೀಯ ಶಕ್ತಿ ನಿರ್ಮಿಸುವ ಗುರಿ ಹೊಂದಿದ್ದೇವೆ ಎಂದರು.
ಮುಂಬರುವ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆಯಲ್ಲಿ ನ್ಯಾಯ ಸಿಗದಿದ್ದರೆ, ಪಕ್ಷ ಪ್ರಬಲವಾಗಿರುವ 60 ರಿಂದ 70 ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಎಚ್ಚರಿಕೆ ನೀಡಿದರು. ಗೆಲ್ಲದಿದ್ದರೂ ಫಲಿತಾಂಶದ ಮೇಲೆ ಪ್ರಭಾವ ಬೀರುವ ಶಕ್ತಿ ನಮ್ಮಲ್ಲಿದೆ ಎಂದು ಹೇಳಿದರು.
ಬಿಹಾರದಲ್ಲಿ ವಿಐಪಿ ಸಾಧಿಸಿರುವ ಯಶಸ್ಸನ್ನು ಉಲ್ಲೇಖಿಸಿದ ಅವರು, ಅದೇ ಮಾದರಿಯನ್ನು ಕರ್ನಾಟಕದಲ್ಲೂ ಅನುಸರಿಸಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಅಧಿಕಾರ ತಂದುಕೊಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷದ ರಾಜ್ಯಮಟ್ಟದ ಬೃಹತ್ ಉದ್ಘಾಟನಾ ಸಮಾವೇಶವು ಜೂನ್ 7ರಂದು ಬೆಂಗಳೂರಿನ ಅಶೋಕ ಹೋಟೆಲ್ನಲ್ಲಿ ನಡೆಯಲಿದೆ ಎಂದು ತಿಳಿಸಿದರು.
City Today News 9341997936

You must be logged in to post a comment.